ಚನ್ನಪಟ್ಟಣ ಉಪಚುನಾವಣೆಗೆ ಡಿ ಕೆ ಬ್ರದರ್ಸ್‌ ಭರ್ಜರಿ ತಯಾರಿ: ಹಾಗಾದ್ರೆ ಕಾಂಗ್ರೆಸ್ ಅಭ್ಯರ್ಥಿ ಯಾರು?

ಪರಿವರ್ತನ್ ಪ್ರಭ:

ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ಚನ್ನಪಟ್ಟಣ ಕ್ಷೇತ್ರವನ್ನ ಗೆಲ್ಲುವ ನಿಟ್ಟಿಲ್ಲಿ ಡಿ ಕೆ ಬ್ರದರ್ಸ್‌ ಭರ್ಜರಿ ತಯಾರಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಕೈ ನಾಯಕರು ಹೇಳಿಕೆ ನೀಡಿದ್ದು, ಅಭ್ಯರ್ಥಿ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಮಾಧ್ಯಮಗಳ ಜೊತೆಗೆ ಶುಕ್ರವಾರ ಮಾತನಾಡಿ, ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆಯ ಕುರಿತು ಮಾತನಾಡಿ, ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು

ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ ಗೌರವಯುತವಾಗಿ ಹೇಳಿದ್ದೇವೆ ಅವರ ಭಾವನೆ, ಕಳಕಳಿ ನಮಗೆ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ನಾವು ಅವರ ವಿಚಾರವನ್ನು ಪರಿಗಣಿಸುತ್ತೇವೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಎಸ್‌ಐಟಿಯನ್ನು ಶಿವಕುಮಾರ್ ತನಿಖಾ ಸಂಸ್ಥೆ ಎಂದು ಟೀಕಿಸಿರುವ ಕುರಿತು ಮಾತನಾಡಿ, ಕುಮಾರಸ್ವಾಮಿ ಅವರಿಗೆ ನನ್ನನ್ನು ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕುತ್ತಿದ್ದಾರೆ. ನನ್ನ ಎಲ್ಲಾ ದಾಖಲೆಗಳು ಇಡಿ ಸಿಬಿಐ ಬಳಿ ಇವೆ. ಹೊಸದಾಗಿ ಹುಡುಕುವುದೇನಿಲ್ಲ. ಅವರು ನನಗೆ ಕೇಳಿದ್ದರೆ ನಾನೇ ಅವರಿಗೆ ನನ್ನ ದಾಖಲೆಗಳನ್ನು ಒದಗಿಸುತ್ತಿದ್ದೆ. ನಾವು ಇನ್ನು ಅವರ ಸುದ್ದಿಗೆ ಹೋಗಿಲ್ಲ. ಉಳಿದ ವಿಚಾರ ಆನಂತರ ಮಾತನಾಡೋಣ ಎಂದು ತಿಳಿಸಿದರು.

ಮೂಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಇಡಿ ದಾಳಿ ಬಗ್ಗೆ ಕೇಳಿದಾಗ, “ಇಡಿ ಅವರು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ. ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು. ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲಾ ದಾಖಲೆಗಳು ಸಾರ್ವಜನಿಕವಾಗಿವೆ. ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ” ಎಂದರು.

ಈ ಹಿಂದೆ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಅನೇಕ ಬಾರಿ ಹೇಳಿದ್ದೀರಿ ಎಂದು ಕೇಳಿದಾಗ, “ಈ ಪ್ರಕರಣ ನ್ಯಾಯಾಲಯದಲ್ಲಿದೆ, ಅವರು ಮೂಡಾ ಕಚೇರಿಗೆ ಭೇಟಿ ನೀಡಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ಇಡಿ ಅವರು ದಾಖಲೆಗಳನ್ನು ಕೇಳಿದ್ದರು, ಇವರು ದಾಖಲೆ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ದಾಖಲೆ ನೀಡುವುದು ತಡವಾಗಿರಬಹುದು, ಇದಕ್ಕಾಗಿ ಇಡಿ ಅವರೇ ಕಚೇರಿಗೆ ಹೋಗಿರಬಹುದು” ಎಂದರು.

ನೈಸ್ ರಸ್ತೆ ವಿಚಾರವಾಗಿ ಕುಮಾರಸ್ವಾಮಿ ಅವರ ವಿಚಾರವಾಗಿ ಕೇಳಿದಾಗ, “ನೈಸ್ ವ್ಯಾಪ್ತಿಯಲ್ಲಿ ಅವರ ಆಸ್ತಿ ಎಷ್ಟಿದೆ ಎಂದು ಮೊದಲು ಅವರು ಬಹಿರಂಗಪಡಿಸಲಿ. ಸಮಯ ಬಂದಾಗ ನಾನು ಅದನ್ನು ಹೇಳುತ್ತೇನೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *